ಬೆಂಗಳೂರು: ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಡಿಸೆಂಬರ್ 28ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಯಾರೂ ಹೊರಗಡೆ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಎಲ್ಲೆಡೆ ನಾಕಾಬಂದಿ ಹಾಕಿ ನಿರ್ಬಂಧ ವಿಧಿಸಲಾಗುತ್ತಿದೆ ಎಂದರು. ಬಸ್, ಕ್ಯಾಬ್ ಸೇವೆ ಇರಲಿದೆ. ತುರ್ತು ಪರಿಸ್ಥಿತಿ ಇದ್ದರೆ, ಆಸ್ಪತ್ರೆಗೆ ತೆರಳುವವರು ದಾಖಲೆ ತೋರಿಸಿ ಪ್ರಯಾಣ ಮಾಡಬಹುದು. ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು ಆದರೆ ಯಾವುದೇ ಪಾಸ್ ನೀಡುವುದಿಲ್ಲ ಎಂದು ತಿಳಿಸಿದರು.

ಇನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇಂದಿರಾನಗರ, ಕೋರಮಂಗಲ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನರ ಓಡಾಟ ನಿಷೇಧಿಸಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ 10 ಗಂಟೆಗೆ ಬಂದ್ ಮಾಡಬೇಕು. ಅನಗತ್ಯವಾಗಿ ಓಡಾಟ ನಡೆಸುವವರು, ಕರ್ಫ್ಯೂ ನಿಯಮ ಉಲ್ಲಂಘಿಸುವವರ ವಿರುದ್ಧ ಎನ್ಡಿಎಂಎ ಕಾಯ್ದೆಯಡಿ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

