ತಮ್ಮ ಜತೆ ಅರ್ಜುನ್ ಸರ್ಜಾಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ.
ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ವರದಿಗೆ ಶ್ರುತಿ ಹರಿಹರನ್ ಆಕ್ಷೇಪಣೆ ಸಲ್ಲಿಸಿಲ್ಲ. ಈ ಕಾರಣಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ವರದಿಯನ್ನು ಅಂಗೀಕರಿಸಿದೆ. ಹೀಗಾಗಿ, ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಗೆಲುವಾಗಿದೆ.
ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್. ಈಗ ನ್ಯಾಯಾಲಯ ಈ ವರದಿಯನ್ನು ಒಪ್ಪಿರುವುದರಿಂದ ಪ್ರಕರಣದಲ್ಲಿ ಅರ್ಜುನ್ ಸರ್ಜಾ ಯಾವುದೇ ತಪ್ಪು ಮಾಡಿಲ್ಲ ಎಂಬುದು ಸಾಬೀತಾದಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

