ಬೆಂಗಳೂರು: ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು ಹಾಗೂ ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳು ಇಲ್ಲ ಎಂಬುದರ ಸೂಚಕವಾಗಿವೆ.
ಅನೇಕ ಕಡೆ ಕೇಂದ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಸೂಚನೆಗಳನ್ನು ಮಂಡಿಸಿದ ಬಿಜೆಪಿಯ ಶಾಸಕರು ಮೋದಿಯವರನ್ನು ಮತ್ತು ಕೇಂದ್ರದ ಯೋಜನೆಗಳನ್ನು ಶ್ಲಾಘಿಸುವುದಕ್ಕಷ್ಟೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕಳಪೆ ಭಾಷಣವನ್ನು ಹಿಂದೆಂದೂ ಕೇಳಿರಲಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ರಾಜ್ಯಪಾಲರ ಭಾಷಣಕ್ಕೆ ಮುಖ್ಯಮಂತ್ರಿಗಳು ನೀಡಿದ ಉತ್ತರಕ್ಕೆ ಪ್ರತಿಕ್ರಿಯಿಸಿದ ಅವರು, ಬಂಡವಾಳಿಗರ ಮತ್ತು ಕಾರ್ಪೋರೇಟ್ ಕುಳಗಳ ಮೂಗಿನ ನೇರಕ್ಕೆ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರು ಇದರಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದರೆ, ಭಾರತದ ಅತಿ ಶ್ರೀಮಂತರಾದ ಅದಾನಿ ಅಂಬಾನಿ ಮುಂತಾದ 142 ಜನರ ಸಂಪತ್ತು 23 ಲಕ್ಷ ಕೋಟಿಗಳಿದ್ದದ್ದು ಈಗ ಅದು 53 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಆದರೆ ಜನರ ಮೇಲಿನ ತೆರಿಗೆ ಹೊರೆ, ಬೆಲೆ ಏರಿಕೆ ಎರಡೂ ದುಪ್ಪಟ್ಟಾಗಿವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

