ಧಾರವಾಡ : ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರವು ಮುಖ್ಯವಾಗಿದೆ. ಜಿಲ್ಲೆಗೆ ಉತ್ತಮ ಆಡಳಿತ ನೀಡಲು ಶ್ರಮಿಸುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಹೇಳಿದರು.
ಅವರು ಇಂದು ಮಧ್ಯಾಹ್ನ ಎಸ್.ಪಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
ಅಬಕಾರಿ ಪರವಾನಿಗೆ ಉಲ್ಲಂಘಿಸಿ ಹೈವೆ ರಸ್ತೆ ಮತ್ತು ಗ್ರಾಮೀಣ ಭಾಗದಲ್ಲಿರುವ ಡಾಬಾ, ಹೋಟೆಲ್ಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಮಾಡುತ್ತಿರುವ ಕುರಿತು ದೂರುಗಳು ಬಂದಿದ್ದು, ಸದ್ಯದಲ್ಲಿಯೇ ಸೂಕ್ತ ಕ್ರಮ ಜರುಗಿಸಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದೆಂದು ಅವರು ಹೇಳಿದರು.
ಮೂಲತಃ ಬೆಳಗಾವಿ ಜಿಲ್ಲೆಯವನಾದ ನಾನು ಈಗಾಗಲೇ ಬಾಗಲಕೋಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ಧಾರವಾಡಕ್ಕೆ ಬಂದಿದ್ದೇನೆ. ಸ್ವಂತ ಜಿಲ್ಲೆಯ ಪಕ್ಕದ ಜಿಲ್ಲೆಗಳಲ್ಲಿ ನನ್ನ ಸೇವೆಗೆ ಅವಕಾಶ ಸಿಕ್ಕಿದ್ದು, ಸೌಭಾಗ್ಯ.
ಧಾರವಾಡ ಜಿಲ್ಲೆಯ ಶಾಂತಿ, ಸುವ್ಯವಸ್ಥೆಗಳನ್ನು ಕಾಪಾಡಿ ಸಮಾಜದ ಸಾಮರಸ್ಯಕ್ಕೆ ದಕ್ಕೆ ಬರದಂತೆ ಸೂಕ್ತ ಕ್ರಮವಹಿಸಲಾಗುವುದು. ಪ್ರತಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸುವ ಮೂಲಕ ಸಾರ್ವಜನಿಕರೊಂದಿಗೆ ನೇರ ಒಡನಾಟ, ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತೇನೆ. ಕಾನೂನು ಬಾಹಿರ ಕ್ರಮಗಳನ್ನು ನಿಯಂತ್ರಿಸಿ ಜಿಲ್ಲೆಗೆ ಉತ್ತಮ ಆಡಳಿತ ನೀಡಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





