ರಾಜ್ಯದ ಕರಾವಳಿ ಭಾಗದ ಮಳೆಯ ಅಬ್ಬರ ಮುಂದುವರೆದಿದ್ದು, ಜುಲೈ 8ರವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಮತ್ತು ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರಿಂದ ಮಳೆ ಕಳೆದೊಂದು ವಾರದಿಂದ ಆ ಭಾಗದಲ್ಲಿ ಸುರಿಯುತ್ತಲೇ ಇದೆ. ಇದೀಗ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 8ರವರೆಗೂ ಮತ್ತೆ ಮಳೆ ಮುಂದುವರಿಯುವ ಸಾಧ್ಯತೆ ಇದ್ದು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದಾರೆ.
ಮುಂದಿನ ಐದು ದಿನಗಳ ಪೈಕಿ ಜುಲೈ 5 ಮತ್ತು 6 ರಂದು ಮಳೆಯ ತೀವ್ರತೆ ಹೆಚ್ಚಾಗುವ ಕಾರಣಕ್ಕೆ ಅಂದು ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಸಿಲಾಗಿದೆ. ಉಳಿದ ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದೈತ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





