ಬೆಂಗಳೂರು: ‘ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರೆ, ನನ್ನನ್ನು ಹೀಗಳೆಯುವ ಮೊದಲು ತಾವು ಆರ್ಎಸ್ಎಸ್, ನರೇಂದ್ರ ಮೋದಿ, ಅಮಿತ್ ಶಾ ಗುಲಾಮಗಿರಿಯಿಂದ ಹೊರಬರಬೇಕು. ಹಾಗೆಯೇ ಅಂಬಾನಿ, ಅದಾನಿಗಳ ಗುಲಾಮಗಿರಿಯಿಂದಲೂ ಹೊರ ಬಂದು ಕನ್ನಡದ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ನಾನು ಹೇಳುತ್ತಿರುವ ಪ್ರತಿ ಸಂಗತಿಯನ್ನೂ ದಾಖಲೆ ಆಧರಿಸಿಯೇ ಹೇಳುತ್ತಿದ್ದೇನೆ. ನಾನು ಸುಳ್ಳು ಹೇಳಿದ್ದೇನೆಂದು ಆರೋಪಿಸಿ ಹುಸಿ ಮಾತುಗಳನ್ನು ಗಾಳಿಗೆ ತೂರಬೇಡಿ. 1999ರಿಂದ ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಸಮಗ್ರ ಶ್ವೇತಪತ್ರವನ್ನು ಹೊರಡಿಸಿ ಎಂದು ಸವಾಲು ಎಸೆದಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಆಡಳಿತ ಟೀಕಿಸಿ ತಾವು ಹೊರ ತಂದಿದ್ದ ‘ಮೋದಿ ಸರ್ಕಾರಕ್ಕೆ ವರುಷ ಎಂಟು, ಅವಾಂತರ ನೂರೆಂಟು’ ಎಂಬ ಪುಸ್ತಕದ ಬಗ್ಗೆ ಟೀಕೆ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





