ಬೆಂಗಳೂರು: ಕಳೆದೊಂದು ವಾರದಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಭರ್ಜರಿಯಾಗಿ ಸುರಿಯುತ್ತಿರುವ ಮಳೆ ಸೋಮವಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆವರಿಸಿಕೊಳ್ಳಲಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು (11 ರಿಂದ 20 ಸೆಂ.ಮೀ) ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಬುಧವಾರದವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ‘ಅತಿ ಭಾರಿ ಮಳೆ’ಯಾಗಲಿರುವುದರಿಂದ (20 ಸೆಂ.ಮೀಗೂ ಹೆಚ್ಚು) ‘ರೆಡ್ ಅಲರ್ಟ್’ ಮುಂದುವರೆಸಲಾಗಿದೆ.
ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂಈ ಮಳೆ ಮುಂದುವರಿಯಲಿದೆ. ಹಾಸನ ಮತ್ತು ಮೈಸೂರು ಜಿಲ್ಲೆಗೆ ‘ಯೆಲ್ಲೋ ಅಲರ್ಚ್’ ಇರಲಿದೆ. ಮಂಗಳವಾರ ಮಳೆ ಅಬ್ಬರ ತುಸು ಕಡಿಮೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಇರಲಿದೆ. ಇದೇ ವೇಳೆ ಉತ್ತರ ಒಳನಾಡಿನಲ್ಲಿ ಮಳೆ ಇನ್ನಷ್ಟು ವ್ಯಾಪಕವಾಗಲಿದ್ದು ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ದಕ್ಷಿಣ ಒಳನಾಡಿನ ಮೈಸೂರು ಮತ್ತು ಹಾಸನ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬುಧವಾರ ಮಲೆನಾಡು ಮತ್ತು ಮಲೆನಾಡಿನ ತಪ್ಪಲಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಇರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





