ಮೈಸೂರು: ಮೂರನೇ ಆಷಾಢದ ಹಿನ್ನಲೆಯಲ್ಲಿ ಸಹಸ್ರಾರು ಮಂದಿ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಈ ಬಾರಿ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಮುಂಜಾನೆ ಜಿಟಿ ಜಿಟಿ ಮಳೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದರು. ಕೆಲವರು ಬಸ್ ಮೂಲಕ ತೆರಳಿದರೆ ಮತ್ತೆ ಕೆಲವರು ಸಾವಿರ ಮೆಟ್ಟಿಲೇರಿ ಪ್ರತಿ ಮೆಟ್ಟಿಲಿಗೂ ಅರಶಿನ ಕುಂಕುಮ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.
ಮುಂಜಾನೆ ಮೂರು ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಶುದ್ಧಗೊಳಿಸಿ, ಬಳಿಕ ವಿಶೇಷವಾಗಿ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ಅಭಿಷೇಕ ನೆರವೇರಿಸಲಾಯಿತು. ರಾತ್ರಿ 9 ಗಂಟೆವರೆಗೂ ಭಕ್ತರು ದರ್ಶನ ಪಡೆದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





