ಬೆಂಗಳೂರು : ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಜಾಗದಲ್ಲಿ ಆ. 3 ರಂದು ನಡೆಯಲಿರುವ ‘ಸಿದ್ದರಾಮಯ್ಯ 75- ಅಮೃತ ಮಹೋತ್ಸವ’ ಸಮಾವೇಶಕ್ಕೆ ಅಮೃತ ಮಹೋತ್ಸವ ಸಮಿತಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ.
‘ಅಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30 ರವರೆಗೆ ಸಮಾವೇಶ ನಡೆಯಲಿದೆ. ಬೆಳಿಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.30ರ ಸುಮಾರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸಮಾವೇಶ ಸ್ಥಳಕ್ಕೆ ಬರಲಿದ್ದಾರೆ’ ಎಂದು ಸಮಿತಿಯ ಮೂಲಗಳು ತಿಳಿಸಿವೆ.
ಸಮಾವೇಶದಲ್ಲಿ ರಾಹುಲ್ ಗಾಂಧಿ ಜೊತೆಗೆ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್ ಸೇರಿದಂತೆ ಆಯ್ದ ಕೆಲವರಿಗೆ ಮಾತ್ರ ಭಾಷಣಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಸಮಾವೇಶದ ಕೇಂದ್ರ ಬಿಂದು ಸಿದ್ದರಾಮಯ್ಯ ಅವರನ್ನು ಸನ್ಮಾನಿಸುವ ಜೊತೆಗೆ, ಅವರ ಪ್ರಮುಖ ಭಾಷಣಗಳ ಸಂಗ್ರಹದ ಪುಸ್ತಕವನ್ನೂ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





