ಹುಬ್ಬಳ್ಳಿ: ರಾಜ್ಯದಲ್ಲಿಯೇ ಶಿಸ್ತಿನ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಹೆಸರುವಾಸಿಯಾಗಿರುವ ಹು-ಧಾ ಪೊಲೀಸ್ ಕಮೀಷನರೇಟ್ ಈಗ ಅಪರೂಪದ ಪ್ರಕರಣದಲ್ಲಿ ಪೊಲೀಸರೇ ಪೋಲೀಸರನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಷಯ ಕಾಲೋನಿಯ ಮನೆಯೊಂದರಲ್ಲಿ ಕುಳಿತು ಎಕ್ಕ-ರಾಜ-ರಾಣಿ ಎಲೆ ತಟ್ಟುತ್ತಿದ್ದ ಪೊಲೀಸ್ ಅಧಿಕಾರಿ- ಸಿಬ್ಬಂದಿ ತಂಡದ ಮೇಲೆ ಪೊಲೀಸರೇ ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ ಘಟನೆಯೊಂದು ನಡೆದಿದೆ.
ಬೇಲಿಯೇ ಎದ್ದು ಹೊಲ ಮೇಯ್ದಂಥ ಪ್ರಕರಣವಾಗಿದ್ದು, ಜೂಜುಕೋರರ ವಿರುದ್ಧ ಸಮರ ಸಾರಬೇಕಿದ್ದ ಶಿಸ್ತಿನ ಇಲಾಖೆಯ ಸಿಪಾಯಿಗಳೇ ಇಲ್ಲಿ ಶಿಸ್ತು ಮರೆತು ಇಸ್ಪೀಟ್ ಜೂಜಾಡುತ್ತಿದ್ದರು. ಗುಂಪು ಸೇರಿ ಅಂದರ್ -ಬಾಹರ್ ಆಟದಲ್ಲಿ ಮೈಮರೆತಿದ್ದರು.
ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಓರ್ವ ಇನ್ಸ್ಪೆಕ್ಟರ್, ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು, ಓರ್ವ ಕಾನ್ ಸ್ಟೆಬಲ್, ಒಬ್ಬ ನಿವೃತ್ತ ಹೆಡ್ ಕಾನ್ಸ್ಟೆಬಲ್ ಗಳಿದ್ದ ಐವರ ತಂಡ ಅಕ್ಷಯ ಕಾಲನಿ ಎರಡನೇ ಹಂತದ ಮನೆ ಸಂಖ್ಯೆ 337ರಲ್ಲಿ ಇಸ್ಪೀಟ್ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ, ಪೊಲೀಸ್ ಆಯುಕ್ತ ಲಾಭೂರಾಮ ಅವರ ಸೂಚನೆ ಹಿನ್ನೆಲೆಯಲ್ಲಿ ಗೋಕುಲ ರೋಡ್ ಠಾಣೆ ಇನ್ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ನೇತೃತ್ವದ ತಂಡ ದಾಳಿ ನಡೆಸಿತ್ತು.
ದಾಳಿಯಲ್ಲಿ ಸಿಎಆರ್ನ ಇಬ್ಬರು ಹೆಡ್ ಕಾನ್ಸ್ಟೆಬಲ್, ಒಬ್ಬ ನಿವೃತ್ತ ಹೆಡ್ ಕಾನ್ಸ್ಟೆಬಲ್ ಹಾಗೂ ಸಂಚಾರ ವಿಭಾಗದ ಒಬ್ಬ ಕಾನ್ ಸ್ಟೆಬಲ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಆರ್ ಇನ್ಸ್ಪೆಕ್ಟರ್ ಪರಾರಿಯಾಗಿದ್ದು, 9 ಸಾವಿರ ರೂ. ನಗದು ಹಾಗೂ 5 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





