ಹುಬ್ಬಳ್ಳಿ: ಅಗಸ್ಟ್ 2 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದು ಅಂದು ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಐತಿಹಾಸಿಕ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ ರಾಹುಲ್ ಆಗಮಿಸಲಿದ್ದು, ಮರುದಿನ ಜಿಲ್ಲೆಯ ಮುರುಘಾಮಠ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ದೇಶದಲ್ಲಿ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದು, ಹಾಲಿನಿಂದ ಬ್ಯಾಂಕ್ ಚೆಕ್ ವರೆಗೆ ಜಿಎಸ್ ಟಿ ಬರೆ ಹಾಕುತ್ತಿದೆ. ಅದನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಹೋರಾಟ ಮಾಡಲು ರಾಜಸ್ಥಾನದಲ್ಲಿ ನಡೆದ ಚಿಂತನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಅದರಂತೆ ಪ್ರತಿಕ್ಷೇತ್ರದಿಂದ ಪಾದಯಾತ್ರೆ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಸೂಚನೆ ಕೊಡಲಾಗಿದೆ. ಅದರಂತೆ 100 ಕ್ಕೂ ಕ್ಷೇತ್ರದಲ್ಲಿ ಸಿದ್ದತೆ ನಡೆಸಿದ್ದಾರೆ ಎಂದರು.
ದಕ್ಷಿಣ ಕನ್ನಡದಲ್ಲಿ ಪ್ರವೀಣ ಹತ್ಯೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಪದೇ ಪದೇ ಇಂತಹ ಹತ್ಯೆಗಳು ನಡೆಯುತ್ತಿವೆ. ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಅಂತಹ ಹತ್ಯೆಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ತನಿಖೆ ವಿಚಾರದಲ್ಲಿ ನಾವು ಭಾಗಿಯಾಗುವುದಿಲ್ಲ. ಸಾವಿಗೆ ನ್ಯಾಯ ಕೊಡಿಸುವ ವಿಚಾರ ಸರ್ಕಾರಕ್ಕೆ ಇದ್ದರೆ ನ್ಯಾಯ ಒದಗಿಸಲಿ ಎಂದರು.
ಕೇಂದ್ರ ಸರ್ಕಾರದಿಂದ ರಾಷ್ಟ್ರಧ್ವಜ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿ ಅವರಿಗೆ ಸ್ವತಂತ್ರದ ಬಗ್ಗೆ ಗೌರವವಿಲ್ಲ. ರಾಷ್ಟ್ರಧ್ವಜದ ಇತಿಹಾಸವು ಕೂಡಾ ಗೊತ್ತಿರದ ಬಿಜೆಪಿಗರು ರಾಷ್ಟ್ರಧ್ವಜದ ಕುರಿತು ಮಾತನಾಡುತ್ತಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಪ್ರತಿಯೊಬ್ಬ ನಾಯಕ, ಕಾರ್ಯಕರ್ತರು ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಪಕ್ಷದ ಕೆಲ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅದನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು ಎಂದರು.
ದಕ್ಷಿಣ ಕನ್ನಡದಲ್ಲಿ ಪ್ರವೀಣ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರದ ಮೇಲೆ ನಂಬಿಕೆಯಿತ್ತು. ಆದರೆ ಸರ್ಕಾರ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಈಗಾಗಲೇ ರಾಜೀನಾಮೆ ಕೊಟ್ಟಿರುವ ಬಿಜೆಪಿ ಕಾರ್ಯಕರ್ತರ ನೋವು ಏನೆಂಬುದು ನನಗೆ ಗೊತ್ತಿದೆ. ಅವರ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಬಿಜೆಪಿ ಕಾರ್ಯಕರ್ತರು ನಮ್ಮ ಪಕ್ಷದ ತತ್ವ ಸಿದ್ದಾಂತ ಮೆಚ್ವಿ ಪಕ್ಷಕ್ಕೆ ಸೇರ್ಪಡೆಗೊಂಡರೆ ನಮ್ಮ ಅಭ್ಯಂತರವಿಲ್ಲ. ಹತ್ಯಗೆ ಒಳಗಾಗಿ ಅಸುನೀಗಿದ ಮೂವರ ಕುಟಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸ ಮಾಡಲಿದ್ದೇನೆ ಎಂದರು.
ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಅಗಸ್ಟ್ 15 ಮಧ್ಯಾಹ್ನ 2 ಗಂಟೆ ನಂತರ ಬೆಂಗಳೂರಿನಲ್ಲಿ 75 ಸಾವಿರಕ್ಕೂ ಅಧಿಕ ಜನರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ನ್ಯಾಷನಲ್ ಕಾಲೇಜವರೆಗೆ ಸ್ವಾತಂತ್ರ್ಯ ನಡೆಗೆ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಹೊರತುಪಡಿಸಿ ಇನ್ನಿತರ ಸಂಘ ಸಂಸ್ಥೆಗಳ ಕಾರ್ಯಕರ್ತರು ಭಾಗವಹಿಸಿ ಎಂದು ಡಿಕೆಶಿ ಕರೆ ಕೊಟ್ಟರು. ಆದರೆ ಅಗಸ್ಟ್ 3 ರಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮೋತ್ಸವ ಕಾರ್ಯಕ್ರಮದ ಕುರಿತು ಡಿ.ಕೆ.ಶಿವಕುಮಾರ್ ತುಟಿ ಬಿಚ್ಚಲಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news





