ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು ಮಳೆಹಾನಿ ಪ್ರದೇಶಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರದಂದು ಸಚಿವರಾದ ಡಾ.ಅಶ್ವತ್ಥ್ ನಾರಾಯಣ್, ಬಿ.ಸಿ.ನಾಗೇಶ್, ಕೋಟ ಶ್ರೀನಿವಾಸ ಪೂಜಾರಿ ಅವರು ಕ್ರಮವಾಗಿ ರಾಮನಗರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಚರಿಸಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದ್ದಾರೆ.
ಜೊತೆಗೆ ಜನರ ದೂರುಗಳನ್ನು ಆಲಿಸಿ ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ನೀಡಿದ್ದಾರೆ.
ಏತನ್ಮಧ್ಯೆ ಕಂದಾಯ ಸಚಿವ ಆರ್.ಅಶೋಕ ಅವರು ಈಗಾಗಲೇ ಪ್ರವಾಹ ಪೀಡಿತ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಮಂಗಳೂರು, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದು ಮಂಗಳವಾರ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸತತ ಮಳೆಯಿಂದಾಗಿ ತೀವ್ರ ಹಾನಿಗೀಡಾಗಿರುವ ರಾಮನಗರ ಜಿಲ್ಲೆಯಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಮಿಂಚಿನ ಸಂಚಾರ ನಡೆಸಿದರು. ಸೋಲೂರು ಹೋಬಳಿಯ ಕೂಡ್ಲೂರು ಗೇಟ್ನಲ್ಲಿ, ಗೋಡೆ ಕುಸಿದು ಇಬ್ಬರು ನೇಪಾಳಿ ಮಕ್ಕಳು ಮೃತಪಟ್ಟಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.