ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ (RAIN) ಆರ್ಭಟ ಆ.23ರಿಂದ ಚುರುಕಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹಲವೆಡೆ ಭೂಕುಸಿತ, ಸಂಚಾರ ಕಡಿತ, ಮನೆ ಕುಸಿತ, ಜೀವಹಾನಿ, ಬೆಳೆ ನಷ್ಟ ಸಂಭವಿಸಿತ್ತು.
ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿ ಜನರು ತತ್ತರಿಸುವಂತಾಗಿತ್ತು. ಆ.12ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಒಳನಾಡಿನಲ್ಲೂ ಮಳೆ ಸದ್ಯಕ್ಕೆ ಬಿಡುವು ಕೊಟ್ಟಿದೆ.
ಆ.23ರಿಂದ ರಾಜ್ಯದಲ್ಲಿ ಒಂದು ವಾರ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಬಿಡುವು ನೀಡಿರುವ ಮಳೆ ಇನ್ನು ಒಂದು ವಾರ ಮುಂದುವರೆಯಲಿದ್ದು, ಒಣ ಹವೆ ಇರಲಿದೆ. ಮತ್ತೆ ಮಳೆ ಬರುವುದರಿಂದ ಕೃಷಿಗೆ ಅನುಕೂಲಕರವಾಗಲಿದೆ ಎಂದು ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

