ಬೆಳಗಾವಿ : ಕೆಪಿಟಿಸಿಎಲ್ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಭಾರೀ ಅಕ್ರಮ ನಡೆದಿರುವ ಶಂಕೆ ಮೂಡಿದೆ.ಬೆಳಗಾವಿಯಲ್ಲಿ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯನ್ನು ಬಂಧಿಸಿದ ಬೆನ್ನಲ್ಲೇ, ಇದೀಗ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಅಪ್ಪ-ಮಗನನ್ನು ಬಂಧಿಸಿದ್ದಾರೆ.
ಗದಗ ನಗರದ ಮುನ್ಸಿಪಲ್ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಆತನ ಪುತ್ರ ಬಂಧಿತ ಆರೋಪಿಗಳು. ಆ.7ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದ ಸಿದ್ದಪ್ಪ ಮದಿಹಳ್ಳಿ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಈ ಇಬ್ಬರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ಬೆಳಗಾವಿಗೆ ಕರೆದುಕೊಂಡು ಬಂದಿರುವ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಕೆಲವು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ.