ಬೆಂಗಳೂರು: ‘ಬಿಡಿಎ ವಸತಿ ಯೋಜನೆ ಅನುಷ್ಠಾನದಲ್ಲಿ ಲಂಚ ಪಡೆದಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭೀತಿ ಪ್ರಾರಂಭವಾಗಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಬುಧವಾರ ವಿಚಾರಣೆ ನಡೆಸಿ, ‘ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಬೇಕು’ ಎಂದು ಆದೇಶಿಸಿ ವಿಚಾರಣೆ ಮುಂದೂಡಿದರು.
ಪ್ರಕರಣವೇನು?: ಬಿಡಿಎ ಗುತ್ತಿಗೆದಾರ ಸೇರಿದಂತೆ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 7,8,9,10 ಮತ್ತು 13, ಭಾರತೀಯ ದಂಡ ಸಂಹಿತೆ-1860ರ ಕಲಂ 383, 384, 415, 418, 420 ಹಾಗೂ ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 3 ಮತ್ತು 4ರ ಅನ್ವಯ ಈ ಖಾಸಗಿ ದೂರು ದಾಖಲಿಸಲಾಗಿದೆ.
ವಿಚಾರಣೆ ನಡೆಸಲು ರಾಜ್ಯಪಾಲರು ಪೂರ್ವಾನುಮತಿ ನೀಡಲು ನಿರಾಕರಿಸಿದ್ದ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖಾಸಗಿ ದೂರನ್ನು 2021ರ ಜೂನ್ 8ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅಬ್ರಹಾಂ, ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಇದೇ 7ರಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು, ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುವಂತೆ ಹಸಿರು ನಿಶಾನೆ ತೋರಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

