ವಿಧಾನಸಭೆ : ಬಿಎಂಎಸ್ ಎಜುಕೇಷನಲ್ ಟ್ರಸ್ಟ್ನಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದ ಜೆಡಿಎಸ್ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿದ್ದು, ಶುಕ್ರವಾರ ಸದನದಲ್ಲಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.
ಬಿಎಂಎಸ್ ಎಜುಕೇಷನಲ್ ಟ್ರಸ್ಟ್ನಲ್ಲಿ ಆಜೀವ ಟ್ರಸ್ಟಿ ನೇಮಕದಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದಕ್ಕೆ ಪ್ರೋತ್ಸಾಹ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ತಲೆದಂಡ ಆಗಬೇಕು ಹಾಗೂ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ವಹಿಸಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಆಗ್ರಹ ಮಾಡಿದ್ದರು. ಇದನ್ನು ತಳ್ಳಿ ಹಾಕಿದ ಸಚಿವ ಅಶ್ವತ್ಥ ನಾರಾಯಣ್ ಯಾವುದೇ ರೀತಿಯ ಅಕ್ರಮ ಆಗಿಲ್ಲ, ಹೀಗಾಗಿ ತನಿಖೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ವೇಳೆ ಉಂಟಾಗಿದ್ದ ಜಟಾಪಟಿಯ ನಡುವೆ ಸ್ಪೀಕರ್ ಸದನವನ್ನು ಶುಕ್ರವಾರಕ್ಕೆ ಮುಂದೂಡಿದ್ದರು.
ಇದರಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿ ವಿಧಾನಸಭೆಯಲ್ಲೇ ಬೀಡು ಬಿಟ್ಟಿದ್ದ ಕುಮಾರಸ್ವಾಮಿ ಹಾಗೂ ಸದಸ್ಯರು ರಾತ್ರಿ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಹೋರಾತ್ರಿ ಧರಣಿ ಹಿಂಪಡೆಯುವಂತೆ ಮನವೊಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

