ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠತ್ಯಾಗ ಮಾಡದ ಕಾರಣಕ್ಕೆ ವೀರಶೈವ ಲಿಂಗಾಯತ ಸಮಾಜದ ಸಭೆಯನ್ನು ಸೆ.29ಕ್ಕೆ ಕರೆಯಲಾಗಿದೆ.
ಚಿತ್ರದುರ್ಗ ಹೊರವಲಯದ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಮಾಜಿ ಸಚಿವ ಎಚ್. ಏಕಾಂತಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಭೆ ಹಮ್ಮಿಕೊಳ್ಳಲಾಗಿದೆ.
‘ಮುರುಘರಾಜೇಂದ್ರ ಮಠವು ಐತಿಹಾಸಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹೆಸರಾಗಿದೆ. ಇಂದಿನ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಗಂಭೀರ ಆರೋಪ ಎದುರಾಗಿದೆ. ಮಠದ ಗೌರವ ಹಾಗೂ ಪ್ರತಿಷ್ಠೆಯನ್ನು ಕಾಪಾಡಲು ಅವರು ಪೀಠತ್ಯಾಗ ಮಾಡಿಲ್ಲ. ಮಠದ ದೈನಂದಿನ ಧಾರ್ಮಿಕ ಮತ್ತು ಆಡಳಿತಾತ್ಮಕ ಚಟುವಟಿಕೆ ನಡೆಸಲು ಹಾಗೂ ಮಠದ ಪರಂಪರೆ, ಸಂಪ್ರದಾಯ ನಿರ್ವಹಿಸಲು ಸಾಧ್ಯವಾಗದಿರುವುದು ದುರದೃಷ್ಟಕರ’ ಎಂದು ಸಮಾಜ ಬಾಂಧವರಿಗೆ ಕಳುಹಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

