ಧಾರವಾಡ :ಶೇ. 99ರಷ್ಟುಮಾಧ್ಯಮಗಳನ್ನು ಕಾರ್ಪೋರೇಟ್ ಸಂಸ್ಥೆಗಳು ನಡೆಸುತ್ತಿದ್ದರಿಂದ ಪತ್ರಕರ್ತರ ಸ್ವಾತಂತ್ರ್ಯ ಕಡಿಮೆಯಾಗುತ್ತಿದೆ. ಇದರ ಫಲವಾಗಿ ನೈಜತೆ, ವಾಸ್ತವಿಕ ವರದಿಗಳ ಕೊರತೆ ಮಾಧ್ಯಮಗಳಲ್ಲಿ ಕಾಣುತ್ತಿದೆ ಎಂದು ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ವಿಚಾಧಿಸಿದರು.
ವಿದ್ಯಾಗಿರಿ ಜೆಎಸ್ಎಸ್ ಕಾಲೇಜಿನ ರತ್ನವರ್ಮ ಸಭಾಭವನದಲ್ಲಿ ಕೇಂದ್ರ ಸರ್ಕಾರದ ವಾರ್ತಾ ಇಲಾಖೆಯ ಬೆಂಗಳೂರು ಪಿಐಬಿ ಶಾಖೆಯಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಕ್ರಮ ಉದ್ಘಾಟಿಸಿದ ಅವರು, ಇತ್ತೀಚೆಗೆ ಪತ್ರಿಕೋದ್ಯಮದಲ್ಲಿ ಸಾಕಷ್ಟುಬದಲಾವಣೆಯಾಗಿದ್ದು ಪತ್ರಕರ್ತರು ನಿರ್ಭಿಡೆಯಿಂದ, ಮುಕ್ತವಾಗಿ ಸಮಾಜದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುಂತಾಗಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನಜಾಗೃತಿ ಮೂಡಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಾರ್ತಾ ಇಲಾಖೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ. ಸರ್ಕಾರದ ಅನೇಕ ಯೋಜನೆಗಳು ಜನರಿಗೆ ತಲುಪುವುದು ಮಾಧ್ಯಮಗಳಿಂದ ಎಂದ ಅವರು, ಸರ್ಕಾರಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಸಂವಹನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿವೆ. ಈ ಮಾಧ್ಯಮಗಳು ಸಮಾಜದಲ್ಲಿ ಪರಿಣಾಮಕಾರಿ ಪಾತ್ರ ನಿರ್ವಹಿಸುತ್ತಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ಕೇಂದ್ರ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸಬೇಕೆಂದು ಅಂಚಟಗೇರಿ ಹೇಳಿದರು.
ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ಧಾರವಾಡ ಜನರ್ಲಿಸ್ಟ್ ಗಿಲ್ಡ್ ಅಧ್ಯಕ್ಷ ಬಸವರಾಜ ಹೊಂಗಲ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಲೋಚನೇಶ ಹೂಗಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಕಾರ್ಯನಿರ್ವಾಹಕ ಎಂಜಿನಿಯರ್ ಜಗದೀಶ್ ಪಾಟೀಲ ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪಿಐಬಿ ಶಾಖೆಯ ಮಾಧ್ಯಮ ಸಂವಹನ ಅಧಿಕಾರಿ ಪಿ.ಬಿ. ಪಾಟೀಲ, ಪಿಐಬಿ ಬೆಂಗಳೂರು ಶಾಖೆಯ ಉಪನಿರ್ದೇಶಕಿ ಕೆ.ವೈ. ಜಯಂತಿ, ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿ ಎಸ್.ಟಿ, ಮುರಳೀಧರ ಕಾರಬಾರಿ ಇದ್ದರು.
ಶಂಭಯ್ಯ ಹಿರೇಮಠ ತಂಡದವರು ಪ್ರಾರ್ಥಿಸಿದರು. ಕೇಂದ್ರ ಸಂವಹನ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

