ಹಾವೇರಿ: ನ.1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ಕಾರಣ ಎರಡು ವರ್ಷಗಳಿಂದ ಸರಳವಾಗಿ ಆಚರಿಸಲಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಈ ವರ್ಷ ಅರ್ಥಪೂರ್ಣವಾಗಿ ವಿವಿಧ ಕನ್ನಡಪರ ಸಂಘಟನೆಗಳು, ಸಂಘ-ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಯಿಂದ ಆಚರಿಸಲಾಗುವುದು ಎಂದರು.
ನಾಡು-ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಡಿನ ಅಭಿವೃದ್ಧಿ ಬಿಂಬಿಸುವ ವಿವಿಧ ಇಲಾಖೆಯ ಸ್ಥಬ್ಧಚಿತ್ರಗಳು, ಕನ್ನಡತಾಯಿ ಭುವನೇಶ್ವರಿಯ ಭಾವಚಿತ್ರ ಮೆರವಣಿಗೆ, ಕನ್ನಡ ನಾಡು-ನುಡಿ, ಸಂಸ್ಕೃತಿಯ ಶ್ರೀಮಂತಿಕೆಗಾಗಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಅದ್ಧೂರಿಯಾಗಿ ರಾಜ್ಯೋತ್ಸವ ಕಾರ್ಯಕ್ರಮ ರೂಪಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಅಂದು ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ, ಪಥಸಂಚಲನ ವೀಕ್ಷಣೆ, ಕರ್ನಾಟಕ ರಾಜ್ಯೋತ್ಸವ ಸಂದೇಶ, ಗಣ್ಯರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆ ಕಾರ್ಯಕ್ರಮ ಆಯೋಜಿಸುವುದು.
ಇದಕ್ಕೂ ಪೂರ್ವದಲ್ಲಿ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಮೈಲಾರ ಮಹದೇವಪ್ಪ ವೃತ್ತದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳ ಬೆಳಿಗ್ಗೆ 7.45ಕ್ಕೆ ಸೇರುವುದು. ಸ್ಥಬ್ಧಚಿತ್ರ, ವಿವಿಧ ಕಲಾತಂಡಗಳ ಮೂಲಕ ತಾಯಿ ಭುವನೇಶ್ವರಿ ಮೆರವಣಿಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಸುವ ಕುರಿತಂತೆ ಚರ್ಚಿಸಲಾಯಿತು. ಈ ಕುರಿತಂತೆ ವ್ಯವಸ್ಥೆ ಕೈಗೊಳ್ಳಲು ವಿವಿಧ ಅಧಿಕಾರಿಗಳಿಗೆ ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

