ಬೆಂಗಳೂರು: ಬಿಜೆಪಿಯು ಜನೋಪಯೋಗಿ ಕೆಲಸಗಳ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಇದನ್ನು ಸಹಿಸದ ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರ ಹಾಗೂ ಪತ್ರಕರ್ತರ ಗೌರವ ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ಕರ್ನಾಟಕದ ಪತ್ರಿಕಾ ಮಿತ್ರರು ವಿಶೇಷವಾದ ಗೌರವ ಹೊಂದಿದ್ದಾರೆ. ಉತ್ತಮ ಕೆಲಸ ಮೂಲಕ ಜನಪ್ರಿಯತೆ ಪಡೆಯುತ್ತಿರುವ ಬಿಜೆಪಿಗೆ ಗೌರವ ಹಾಳು ಮಾಡುವ ಕೆಲಸವಾಗಿದೆ. ಹಬ್ಬದ ಸಂದರ್ಭದಲ್ಲಿ ಉಡುಗೊರೆ ಕೊಡುವುದು ಹಿಂದೂ ಧರ್ಮದ ಪ್ರತೀತಿ, ಪರಂಪರೆ ಮತ್ತು ಇತಿಹಾಸ. ಬಣ್ಣದ ಹಬ್ಬ ಬಂದಾಗ ಬಣ್ಣ ಹಚ್ಚುತ್ತೇವೆ. ದೀಪಾವಳಿ ಬಂದಾಗ ಪಟಾಕಿಗಳನ್ನು ಸಿಡಿಸಿ, ಉಡುಗೊರೆ-ಸಿಹಿ ನೀಡುತ್ತೇವೆ. ಕಾಂಗ್ರೆಸ್ಗೆ ಹಿಂದೂ ಹಬ್ಬಗಳ ಬಗ್ಗೆ ಇಷ್ಟು ದ್ವೇಷ ಏಕೆ? ಎಂದು ಪ್ರಶ್ನಿಸಿದರು.
ಪತ್ರಕರ್ತರಿಗೆ ಹಣ ನೀಡಿರುವುದು ನಿಜವೇ ಆಗಿದ್ದಲ್ಲಿ, ಕಾಂಗ್ರೆಸ್ಗೆ ಯಾರು ದೂರು ನೀಡಿದ್ದಾರೆ ಎಂದು ತಿಳಿಸಿಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಹಣ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ಗೆ ಯಾವುದೇ ಮಾಧ್ಯಮದ ಸ್ನೇಹಿತರು ದೂರು ನೀಡಿಲ್ಲ. ಇದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದು ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ಸಾಕ್ಷಿ ಇಲ್ಲದೆ ಆಪಾದನೆ ಮಾಡುವುದು ಎಷ್ಟು ಸರಿ ಎಂದು ಸುಧಾಕರ್ ಕಿಡಿ ಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

