ಚಿತ್ರದುರ್ಗ: ರಾಜ್ಯ ರಾಜಕೀಯಲ್ಲಿ 2023ರ ವಿಧಾನಸಭೆ ಈಗಿನಿಂದಲೇ ಕಸರತ್ತುಗಳು ನಡೆಯುತ್ತಲೇ ಇವೆ. ಹಾಗೆಯೇ 2023ರ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ ಅವರು ಸ್ಪರ್ಧಿಸಲು ತಯಾರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿರೇಂದ್ರ ಪರವಾಗಿ ಅಭಿಮಾನಿಗಳು ಅರ್ಜಿ ಸಲ್ಲಿಸಿದರು.
2023ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಯುತ್ತಿದೆ. ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. ಈ ಹಿಂದೆಯಷ್ಟೇ ಕ್ಯಾಸಿನೊ ದೊರೆ ಹಾಗೂ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದುದು ಬೆಳಕಿಗೆ ಬಂದಿತ್ತು. “ಭಾರತ್ ಜೋಡೋ” ಪಾದಯಾತ್ರೆ ವೇಳೆ ಪೂರ್ವಭಾವಿ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಬಂದಿದ್ದರು. ಆಗ ಪಪ್ಪಿ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಭಾವಚಿತ್ರ, ಫೋಟೋ ಹಿಡಿದು ಡಿ.ಕೆ.ಶಿವಕುಮಾರ್ ಬಳಿ ಒತ್ತಾಯಿಸಿದ್ದರು. ಆಗಿನಿಂದಲೇ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

