ಬೆಂಗಳೂರು : ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿತ್ತು.ಆದರೆ, ನಾಳೆಯಿಂದ (ಡಿ. 5) ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 5ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎಂಬ ಮುನ್ಸೂಚನೆಯಿದೆ. ಇಂದು ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ. ಡಿಸೆಂಬರ್ 5ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತದ ಪ್ರದೇಶ ನಿರ್ಮಾಣವಾಗಲಿದೆ. ಮೈಸೂರಿನಲ್ಲಿ ಡಿ. 14ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಹೆಚ್ಚಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ತಜ್ಞ ಹಾಗೂ ವಿಜ್ಞಾನಿ ಡಾ. ಪ್ರಸಾದ್ ತಿಳಿಸಿದ್ದಾರೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇಂದು ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

