ಕೊಲ್ಲಾಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಲಿದೆ. ಈ ಸಂಬಂಧ ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸುವ ಸಾಧ್ಯತೆಗಳಿವೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ , ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭಾಗಿಯಾಗಲಿದ್ದು, ಎರಡು ರಾಜ್ಯಗಳ ನಡುವೆ ಸೌಹಾರ್ದ ಮೂಡಿಸುವ ಸಂಬಂಧ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಹಾರಾಷ್ಟ್ರ ನಾಯಕರ ನಿಯೋಗ ಭೇಟಿ ಮಾಡಿದೆ.
ಯಾವುದೇ ಕಾರಣಕ್ಕೂ ಕರ್ನಾಟಕದ ನಿಲುವಿನಲ್ಲಿ ಬದಲಾವಣೆ ಇಲ್ಲ. ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮವಾಗಿದೆ. ಮಹಾರಾಷ್ಟ್ರ ಸರ್ಕಾರ ನಮ್ಮ ತಂಟೆಗೆ ಬರದಂತೆ ಹೇಳಿ ಎಂದು ಆಗ್ರಹಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಮುಂದಾಗಿದ್ದಾರೆ.
ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಂಇಎಸ್ ಮಹಾಮೇಳಕ್ಕೂ ಅವಕಾಶ ಕೊಡದಂತೆ ಹಾಗೂ ಅಂದಿನ ಸಮ್ಮೇಳನಕ್ಕೆ ಮಹಾರಾಷ್ಟ್ರ ನಾಯಕರು ಬರದಂತೆ ಸೂಚಿಸುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿಕೊಳ್ಳಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಮೀಟಿಂಗ್ನಲ್ಲಿ ಏನಾಗಲಿದೆ ಎಂಬುದರ ಬಗ್ಗೆ ಎರಡೂ ರಾಜ್ಯದ ಜನರು ಕಾಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

