ಶಿವಮೊಗ್ಗ: ಗಮಕ ಕಲೆಯಿಂದಲೇ ದೇಶದಲ್ಲೇ ಪ್ರಸಿದ್ಧಿ ಪಡೆದಿದ್ದ ಎಚ್.ಆರ್.ಕೇಶವಮೂರ್ತಿ ಅವರು (88) ನಿಧನರಾದರು. ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು.
1934ರ ಫೆ.22 ರಂದು ಹೊಸಹಳ್ಳಿ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರರಾಗಿ ಜನಿಸಿದ ಇವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಢುವುದನ್ನು ರೂಢಿಸಿಕೊಂಡ ಅವರು, 100 ಕ್ಕೂ ಅಧಿಕ ವಿಭಿನ್ನ ರಾಗಗಳಲ್ಲಿ ವಾಚನ ಮಾಡುವ ಮೂಲಕ ‘ಶತರಾಗಿ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಶಾಂತಲನಾಟ್ಯಶ್ರೀ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ ಸೇರಿದಂತೆ 2022 ರಲ್ಲಿ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು.
ಹೊಸಹಳ್ಳಿಯ ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾಗಿ ಗಮಕ ತರಗತಿಗಳನ್ನು ನಡೆಸಿ, ಮತ್ತೂರು ಶಿವಮೊಗ್ಗ ಮುಂತಾದೆಡೆ ನೂರಾರು ವಿದ್ಯಾರ್ಥಿಗಳಿಗೆ ಗಮಕ ಶಿಕ್ಷಣ ನೀಡಿದ ಹಿರಿಮೆ ಕೇಶವಮೂರ್ತಿ ಅವರದ್ದು. ಡಾ. ಮತ್ತೂರು ಕೃಷ್ಣಮೂರ್ತಿ ಮತ್ತು ಕೇಶವಮೂರ್ತಿಗಳ ಜೋಡಿ ಜಗತ್ಪ್ರಸಿದ್ಧವಾಗಿದೆ. ಇವರಿಬ್ಬರ ವಾಚನ ವ್ಯಾಖ್ಯಾನದಲ್ಲಿ ಕುಮಾರವ್ಯಾಸ ಭಾರತದ 200 ಕ್ಯಾಸೆಟ್ಟುಗಳು ಬಿಡುಗಡೆಯಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

