Breaking News

ವಿಧಾನಸಭೆ ಚುನಾವಣೆ ಪೂರ್ವತಯಾರಿ ಪರಿವೀಕ್ಷಣೆ…

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ರ ಹಿನ್ನಲೆಯಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು.

2023 ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಬೇಟಿಗಾಗಿ ಜನವರಿ 2 ರಂದು ರಾಜ್ಯಕ್ಕೆ ಆಗಮಿಸಿರುವ ಅವರು ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎರಡನೇ ದಿನ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಅವರ ಸಂಬಂಧಿಸಿದ ಅಧಿಕಾರಿಗಳ ತಂಡಗಳ ಜೊತೆ ವರ್ಚ್ಯುಯಲ್ ಮೂಲಕ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದರು.

ಸಭೆಯಲ್ಲಿ ಮುಖ್ಯವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಅದರಲ್ಲೂ ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆ ಕುರಿತಂತೆ ಅನುಸರಿಸಬೇಕಾದ ವಿಧಾನಗಳ ಕುರಿತು ಹೆಚ್ಚು ಒತ್ತು ನೀಡುವಂತೆ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಮುಖ್ಯವಾಗಿ ಸಾರ್ವಜನಿಕರ ಮಾಹಿತಿ ಸರಿಯಾಗಿರಬೇಕು ಜೊತೆಗೆ ಯಾವುದೇ ಕಾರಣದಿಂದ ಇರುವವರ ಹೆಸರುಗಳನ್ನು ಕೈ ಬಿಡದಂತೆ ಜಾಗೃತಿವಹಿಸಬೇಕು, ಜಿಲ್ಲಾ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ಖುದ್ದು ಬೇಟಿ ನೀಡಿ ಪರಿಶೀಲಿಸಬೇಕು. ಪ್ರತಿ ಮನೆ-ಮನೆಗೆ ಬೇಟಿ ನೀಡಿ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿರುವ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು.

Get ready to assembly election 2023

ಅಂತಿಮ ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ (Addition) ಮತ್ತು ತೆಗೆದುಹಾಕಿರುವ (Deletion) 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸಕಾರಾಣಗಳನ್ನು ಗುರುತಿಸಿ ಸರಿಮಾಡುವಂತೆ ಸೂಚಿಸಿದರು. ಕಳೆದ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇಕಡಾವಾರು ಮತದಾನವನ್ನು ಹೆಚ್ಚಿಸಲು ಸೂಕ್ತ ಕ್ರಮಕೈಗೊಳ್ಳುವುದು ಹಾಗೂ ಮತದಾರರ ಜಾಗೃತಿಗಾಗಿ ಹೆಚ್ಚಿನ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಲಹೆ ನೀಡಿದರು.

ಇದಲ್ಲದೇ, ಚುನಾವಣಾ ಕಾರ್ಯಕ್ಕಾಗಿ ಅವಶ್ಯವಿರುವ ಮಾನವ ಸಂಪನ್ಮೂಲ ಕುರಿತು ಸಹ ಚರ್ಚಿಸಿದ ಅವರು, ತಮಗೆ ಅವಶ್ಯವಿರುವ ಸ್ಥಾನಗಳ ಕುರಿತು ಕೂಡಲೇ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಗಮನಕ್ಕೆ ತರಲು ಸೂಚಿಸಿದರು. ಈ ಎರಡು ದಿನಗಳ ಬೇಟಿಯಲ್ಲಿ ಮೊದಲ ದಿನ ರಾಜ್ಯ ಮಟ್ಟದ ಹಾಗೂ ಎರಡನೇ ದಿನ ಜಿಲ್ಲಾಮಟ್ಟದ ಸಭೆ ನಡೆಸಿದ ನಂತರ ಅವರು ಪೂರ್ವ ತಯಾರಿ ಕಾರ್ಯಗಳ ಕುರಿತು ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತೃಪ್ತಿ ವ್ಯಕ್ತಪಡಿಸಿದ ಅವರು ಉತ್ತಮವಾದ ಚುನಾವಣೆಗಾಗಿ ಎಲ್ಲರೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದರು.

ಈ ಎರಡು ದಿನಗಳ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಪಿ. ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *