ಹುಬ್ಬಳ್ಳಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್ ಮಂಡನೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಕಳಸಾ ಬಂಡೂರಿ ನಾಲೆ ವಿಸ್ತರಣೆಗೆ ರೂ.1000 ಕೋಟಿ ಘೋಷಿಸಲಾಗಿದೆ. ಅಲ್ಲದೇ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗುವುದು. ರೂ.217 ಕೋಟಿ ವೆಚ್ಚದಲ್ಲಿ ಬೈಲಹೊಂಗಲ ತಾಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. ಗಡಿ ಭಾಗದ ಸಮಗ್ರ ಅಭಿವೃದ್ಧಿಗೆ ರೂ.150 ಕೋಟಿ ಅನುದಾನ ಮೀಸಲಿಡಲಾಗಿದೆ. ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗೆ ಒತ್ತು ನೀಡಲಾಗಿದೆ. 9 ಹೊಸ ಕೈಗಾರಿಕಾ ವಸಾಹತು ಸ್ಥಾಪನೆ, 19 ಕಾರ್ಮಿಕ ವಿಮಾ ಆಸ್ಪತ್ರೆ ಸ್ಥಾಪನೆ, 73 ಕರ್ನಾಟಕ ಪಬ್ಲಿಕ್ ಶಾಲೆ ಮತ್ತು 50 ಆದರ್ಶ ವಿದ್ಯಾಲಯ ಆರಂಭ, 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಸ್ಥಾಪನೆ, ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಇತರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ, ಭೂ ಸಿರಿ ಯೋಜನೆ, ಜೀವನ್ ಜ್ಯೋತಿ ಕಿಸಾನ್ ಯೋಜನೆ, ಗೃಹಿಣಿ ಶಕ್ತಿ ಯೋಜನೆ, ವಿದ್ಯಾ ವಾಹಿನಿ ಯೋಜನೆ, ನೇಕಾರ ಸಮ್ಮಾನ್ ಯೋಜನೆ ಸೇರಿದಂತೆ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತದೆ. ಕೊಪ್ಪಳದ ಅಂಜನಾದ್ರಿ ಬೆಟ್ಟ, ಕೇಂದ್ರದ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಗ್ರಾಮೀಣಾಭಿವೃದ್ಧಿ, ಮೀನುಗಾರಿಕೆ, ಶಿಕ್ಷಣ, ಆರೋಗ್ಯ, ಕ್ರೀಡೆ, ನೀರಾವರಿ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಬಜೆಟ್ ಮಂಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಬಣ್ಣಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





