ಮೈಸೂರು: ‘ನಾವು ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಉಚಿತವಾಗೇನೂ ಕೇಳಿರಲಿಲ್ಲ. ಆದರೆ, ಕೊಡುವುದಿಲ್ಲ ಎಂದು ಹೇಳಿದೆ. ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟವನ್ನೇ ರೂಪಿಸುತ್ತೇವೆ. ಈ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಮಾಹಿತಿ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
‘ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿಯನ್ನು ಜುಲೈ 1ರಿಂದ ಕೊಡಬೇಕೆಂದು ತೀರ್ಮಾನಿಸಿದ್ದೇವೆ. ನಮ್ಮ ಬಳಿ ಅಕ್ಕಿ ಇಲ್ಲ ಎಂದು ಕೇಂದ್ರ ಸರ್ಕಾರದವರು ಕಾಗದ ಬರೆದಿದ್ದಾರೆ. ಹೀಗಾಗಿ, ನಮಗೇನೂ ಉಳಿದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚತ್ತೀಸ್ಗಡ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯದವರ ಜೊತೆ ಮಾತನಾಡಿದ್ದಾರೆ. ಯಾವ ರೀತಿ ಖರೀದಿ ಮಾಡಬೇಕು ಎನ್ನುವುದನ್ನು ನೋಡುತ್ತಿದ್ದಾರೆ’ ಎಂದು ತಿಳಿಸಿದರು.
‘ಕೇಂದ್ರ ಸರ್ಕಾರದ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಈ ತಾರತಮ್ಯವನ್ನು ವಿರೋಧಿಸುತ್ತೇವೆ. ನಮಗೆ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಎಲ್ಲ ರಾಜ್ಯಗಳಿಗೂ ವಿತ್ ಡ್ರಾ ಮಾಡಿದೆ’ ಎಂದು ಆರೋಪಿಸಿದರು.
‘ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಖರೀದಿಸಬೇಕಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.
‘ಯಾರ ಬಳಿಯೂ ಬೆರಳು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ’ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





