ಧಾರವಾಡ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ.
ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದು, ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಬೇಕು ಎಂಬ ಕಾಂಗ್ರೆಸ್ ಕನಸು ಕೊನೆಗೂ ಕಮರಿದಂತಾಗಿದೆ. ಶತಾಯಗತಾಯ ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಲು ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಸಂತೋಷ ಲಾಡ್ ಅವರು ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅವರ ಕಾರ್ಯತಂತ್ರ ಕೊನೆಗೂ ಫಲಿಸಲಿಲ್ಲ.
ಕಾಂಗ್ರೆಸ್ ಪಕ್ಷ ಬಿಜೆಪಿ ಸದಸ್ಯರಿಗೆ ಆಸೆ, ಆಮಿಷಗಳನ್ನು ಒಡ್ಡಬಹುದು ಎಂದು ಬಿಜೆಪಿ ತನ್ನೆಲ್ಲ ಪಾಲಿಕೆ ಸದಸ್ಯರನ್ನು ದಾಂಡೇಲಿ ರೆಸಾರ್ಟ್ಗೆ ಶಿಫ್ಟ್ ಮಾಡಿತ್ತು. ಚುನಾವಣೆ ದಿನವೇ ಅವರನ್ನು ದಾಂಡೇಲಿಯಿಂದ ನೇರವಾಗಿ ಧಾರವಾಡದ ಮಂದಾರ ಹೋಟೆಲ್ಗೆ ಕರೆತಂದು ಅಲ್ಲಿಂದ ನೇರವಾಗಿ ಪಾಲಿಕೆಗೆ ಕರೆತಂದಿತು. ಬಿಜೆಪಿ ಪಕ್ಷದ ಸದಸ್ಯರು ಅಡ್ಡ ಮತದಾನ ಮಾಡದಂತೆ ಅವರಿಗೆ ವಿಪ್ ಕೂಡ ಜಾರಿ ಮಾಡಲಾಗಿತ್ತು. ಕಾಂಗ್ರೆಸ್, ಬಿಜೆಪಿ, ಎಂಐಎಂ ಹಾಗೂ ಪಕ್ಷೇತರ ಸದಸ್ಯರು ಕೂಡ ಸಭೆಗೆ ಹಾಜರಾಗಿದ್ದರು.
ಎಲ್ಲಾ ಸದಸ್ಯರು ಸಭೆಗೆ ಹಾಜರಾಗುತ್ತಿದ್ದಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಪ್ರಭಾರ ಆಯುಕ್ತ ನಿತೇಶ್ ಪಾಟೀಲ ಅವರು ಸಭೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. 46 ಜನ ಸದಸ್ಯರು ಬಿಜೆಪಿ ಅಭ್ಯರ್ಥಿಗಳ ಪರ ಮತ ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದರು. ಆ ಮೂಲಕ ಪೂರ್ಣ ಬಹುಮತ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೇ ಬಂದಿದ್ದರಿಂದ ಆಯುಕ್ತರು ಬಿಜೆಪಿ ಅಭ್ಯರ್ಥಿಗಳನ್ನೇ ಮೇಯರ್ ಹಾಗೂ ಉಪಮೇಯರ್ ಎಂದು ಘೋಷಣೆ ಮಾಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





