ಹುಬ್ಬಳ್ಳಿ: ಶಾಲೆ ಆರಂಭವಾಗಿ ಇನ್ನೂ ಒಂದು ತಿಂಗಳು ಕೂಡ ಪೂರೈಸಿಲ್ಲ. ಈ ನಡುವೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆಯೊಂದು ಹುಬ್ಬಳ್ಳಿ ತಾಲ್ಲೂಕಿನ ಮೊರಬ ಗ್ರಾಮದ ಸರಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.
ಹೌದು.. ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು, ಶಾಲಾ ಸಮಿತಿಯ ಸದಸ್ಯರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮದ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಇನ್ನೂ ಮೊರಬದ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ಸುಮಾರು 200 ಮಕ್ಕಳಿದ್ದಾರೆ. ಇದು ಶತಮಾನ ಕಂಡ ಶಾಲೆಯಾಗಿದೆ. ಮೊದಲೇ ಮುಖ್ಯ ಶಿಕ್ಷಕರ ನೇಮಕಾತಿಯಾಗಿಲ್ಲ. ಮರಳಿ ಯಾರನ್ನೂ ನೇಮಕ ಮಾಡಿಲ್ಲ. ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮೊದಲಿನಿಂದಲೂ ವಿಶೇಷ ಸಾಧನೆ ಮಾಡಿ, ರಾಷ್ಟ್ರಮಟ್ಟದ ವಾಲಿಬಾಲ್, ರಾಜ್ಯಮಟ್ಟದ ಕಬ್ಬಡಿ ಆಟದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಲೆಯಲ್ಲಿ ಸುವ್ಯವಸ್ಥಿತವಾದ ಮೈದಾನ ಇದೆ. ಇಷ್ಟು ಇದ್ದಾಗಲೂ ದೈಹಿಕ ಶಿಕ್ಷಣ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಬೇಕು. ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಡಿಡಿಪಿಐ ಹಾಗೂ ಬಿಇಓ ಅವರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ಬಿಇಓ ಎಸ್.ಬಿ. ಮಲ್ಲಾಡ್ ಅವರು ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಗ್ರಾಮಸ್ಥರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆಯಿತು. ಮಕ್ಕಳು ಮೈದಾನದಲ್ಲಿಯೇ ಕುಳಿತು ಓದಿಕೊಂಡರು. ಎಸ್ಟಿಎಂಸಿ ಅಧ್ಯಕ್ಷ ಗಂಗಪ್ಪ ಕಾಲವಾಡ, ಸದಸ್ಯ ಮಂಜುನಾಥರಡ್ಡಿ ಕರಡ್ಡಿ, ಬಸವರಾಜ ಶಿರಗುಪ್ಪಿ, ಗ್ರಾಪಂ ಅಧ್ಯಕ್ಷ ನಾಗರಾಜ ಮನಗೂಳಿ ಸೇರಿದಂತೆ ಮತ್ತಿತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





