ನವದೆಹಲಿ: ಮಣಿಪುರ ಹಿಂಸಾಚಾರ ವಿಚಾರವಾಗಿ ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಭಾರಿ ಗದ್ದಲ ನಡೆಯುತ್ತಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ 17 ಪ್ರತಿಪಕ್ಷಗಳ ನಾಯಕರು ಸಾಂಕೇತವಾಗಿ ಕಪ್ಪು ಬಟ್ಟೆ ಧರಿಸಿ ಗುರುವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ.ಮಣಿಪುರ ಪರಿಸ್ಥಿತಿಯ ಕುರಿತು ಪ್ರಧಾನಿ ಮೋದಿಯವರು ಹೇಳಿಕೆ ನೀಡುವಂತೆ ಪಟ್ಟು ಹಿಡಿದಿರುವ ನಾಯಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ನಡೆಸಿ ಸಂಸತ್ತಿನ ಉಭಯ ಸದನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಏನೆಲ್ಲ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಚರ್ಚಿಸಿದರು.
ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಮಗೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಇದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವೀಕರಿಸಿದ್ದರು. ಅಲ್ಲದೇ ಮಣಿಪುರ ಮತ್ತು ಇತರ ಜ್ವಲಂತ ಸಮಸ್ಯೆಗಳ ಕುರಿತು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷಗಳ ನಡುವಿನ ಹಣಾಹಣಿಗೆ ಸಮಯ ನಿಗದಿ ಮಾಡುವುದಾಗಿಯೂ ಅವರು ಹೇಳಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಪ್ರತಿಪಕ್ಷದ ನಾಯಕರು ಸಾಂಕೇತವಾಗಿ ಕಪ್ಪು ಬಟ್ಟೆ ಧರಿಸಿ ಮತ್ತೆ ಒಗ್ಗಟ್ಟಿನ ಮಂತ್ರ ಜಪಿಸಿದರು. ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟ್ಟಿ ಹಾಕಲು ಯಾವೆಲ್ಲ ಪ್ರಯೋಗಗಳನ್ನು ಉಪಯೋಗಿಸಬೇಕು ಎಂಬುದರ ಬಗ್ಗೆ ಮಾತುಕತೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





