ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಖಾಲಿ ಇರುವ ಮೂರು ಪ್ರಮುಖ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಜೊತೆ ಹಿಂದುಳಿದ ವರ್ಗಗಳ ಸಮೀಕರಣದೊಂದಿಗೆ ಆಯಕಟ್ಟಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಬಿಜೆಪಿ ಪಡಸಾಲೆಯಲ್ಲಿ ಮಾತುಗಳು ಕೇಳಿಬರುತ್ತಿದೆ.
ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ , ಅಧಿವೇಶನ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆಗಿಂತ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಈಗ ಹೆಚ್ಚಿನ ಮಹತ್ವ ಬಂದಿದೆ. ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವಧಿ ಜನವರಿಯಲ್ಲೇ ಪೂರ್ಣಗೊಂಡಿದ್ದರೂ ವಿಧಾನಸಭಾ ಚುನಾವಣಾ ಕಾರಣಕ್ಕಾಗಿ ಕಟೀಲ್ ಅವರನ್ನೇ ಮುಂದುವರೆಸಲಾಗಿತ್ತು. ಆದರೆ, ಇದೀಗ ವಿಧಾನಸಭಾ ಚುನಾವಣೆ ಮುಗಿದಿದ್ದು, ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಬೇಕಿರುವ ಹಿನ್ನೆಲೆಯಲ್ಲಿ ಹೊಸ ತಂಡ ರಚನೆಗೆ ಪೂರಕವಾಗಿ ಹೊಸ ರಾಜ್ಯಾಧ್ಯಕ್ಷರ ನೇಮಕ ಆಗಬೇಕಿದೆ. ಹಾಗಾಗಿ, ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಗೆ ಬಿಜೆಪಿಯಲ್ಲಿ ಚಾಲನೆ ನೀಡಲಾಗಿದೆ.
ಜಾತಿ ಲೆಕ್ಕಾಚಾರ: ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ, ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿ, ಎರಡು ದೊಡ್ಡ ಸಮುದಾಯಕ್ಕೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಆದ್ದರಿಂದ ಸಿಟಿ ರವಿ, ಅಶ್ವತ್ಥ್ ನಾರಾಯಣ,ಶೋಭಾ ಕರಂದ್ಲಾಜೆ ಹೆಸರುಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿವೆ. ಇದರಲ್ಲಿ ಸಿ.ಟಿ.ರವಿ ಹೆಸರು ಹೆಚ್ಚು ಪ್ರಚಲಿತವಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಸಿಟಿ ರವಿ ಅವರನ್ನು ಕೇಂದ್ರ ತಂಡ ಪುನರ್ ರಚನೆ ವೇಳೆ ಕೈಬಿಟ್ಟಿದೆ. ಸಚಿವರಾಗಿದ್ದ ಸಿ.ಟಿ.ರವಿ ಸಂಘಟನೆಗೆ ಬರುವಂತೆ ವರಿಷ್ಠರಿಂದ ಬಂದ ಸಂದೇಶಕ್ಕೆ ಮನ್ನಣೆ ನೀಡಿ ಯಡಿಯೂರಪ್ಪ ಸಂಪುಟಕ್ಕೆ ರಾಜೀನಾಮೆ ನೀಡಿ ದೆಹಲಿಗೆ ತೆರಳಿದ್ದರು. ಈಗ ದೆಹಲಿ ಜವಾಬ್ದಾರಿಯಿಂದ ಸಿಟಿ ರವಿ ಅವರನ್ನು ಮುಕ್ತಗೊಳಿಸಿದೆ. ಹಾಗಾಗಿ, ಅವರಿಗೆ ಬಹುತೇಕ ರಾಜ್ಯಾಧ್ಯಕ್ಷ ಸ್ಥಾನ ಅಂತಿಮವಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





