ಬೆಂಗಳೂರು: ಎಸ್ಸಿಎಸ್ಪಿ, ಟಿಎಸ್ಪಿ(Scheduled Caste Sub Plan and Tribal Sub Plan)ಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂಬ ನಿಯಮ ಇದ್ದರೂ ಕೂಡ ಅದನ್ನು ಉಲ್ಲಂಘಿಸಿ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಮೂಲಕ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರೇ ಈ ಆರೋಪವನ್ನು ಒಪ್ಪಿಕೊಂಡಿದ್ದಾರೆ. ಎಸ್ಸಿಎಸ್ಪಿ, ಟಿಎಸ್ಪಿಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂಬ ನಿಯಮ ಇದೆ. ಆದರೆ, ರಾಜ್ಯ ಸರ್ಕಾರ ಇದನ್ನು ಉಲ್ಲಂಘಿಸುವ ಮೂಲಕ ದಲಿತ ಸಮುದಾಯಕ್ಕೆ ಮಹಾಮೋಸ ಮಾಡಿದೆ ಎಂದು ಅವರು ದೂರಿದ್ದಾರೆ
ಎಸ್ಸಿಎಸ್ಪಿ, ಟಿಎಸ್ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲೇ ಸರ್ಕಾರ ಈ ವಿಚಾರವನ್ನು ಮುಚ್ಚಿಡುವ ಪ್ರಯತ್ನ ನಡೆಸಿತ್ತು. 2023-24ನೇ ಸಾಲಿನ ಪರಿಷ್ಕೃತ ಬಜೆಟ್ನ ಲಿಂಕ್ ಡಾಕ್ಯುಮೆಂಟ್ನಲ್ಲಿ ಗ್ಯಾರಂಟಿ ಯೋಜನೆಗೆ ಈ ಹಣವನ್ನು ಬಳಸಿಕೊಂಡ ಬಗ್ಗೆ ದಾಖಲೆ ಇತ್ತು. ಸರ್ಕಾರ ಸತ್ಯವನ್ನು ಮುಚ್ಚಿ ಹಾಕಲು ನಡೆಸಿದ ಪ್ರಯತ್ನ ಬಯಲಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಸರ್ಕಾರ ನೀಡುವ ಯಾವುದೇ ಸಮರ್ಥನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ಒಂದು ಕೈಯಲ್ಲಿಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಶೋಷಿತರ ಅಭಿವೃದ್ಧಿಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ನಿಗದಿಯಾದ ಹಣವನ್ನು ಬೇರೆ ಯೋಜನೆಗೆ ಬಳಸಿಕೊಳ್ಳುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯುವುದನ್ನು ಅಭ್ಯಾಸ ಮಾಡಿಕೊಳ್ಳಲಿ ಎಂದು ಕುಟುಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





