ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಸಿಐಡಿ, ಐಜಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿತ್ತು. ಜಂಟಿ ನಿರ್ದೇಶಕ ವಿ ಎಸ್ ಅಶೋಕ್ ಅವರೊಂದಿಗೆ ಸಿಐಡಿ ಅಧಿಕಾರಿಗಳು ಕೆಲ ಕಾಲ ಮಾತುಕತೆ ನಡೆಸಿದರು.
ನಂತರ ಪತ್ರ ಬರೆದಿದ್ದಾರೆ ಎನ್ನಲಾದ ಎಲ್ಲಾ ಏಳು ಸಹಾಯಕ ನಿರ್ದೇಶಕರ ಜೊತೆ ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ರಾಜ್ಯಪಾಲರ ಕಚೇರಿಗೆ ಬಂದಿರುವ ಪತ್ರ ಮೈಸೂರು ನಗರದ ಸರಸ್ವತಿ ಪುರಂ ಅಂಚೆ ಕಚೇರಿಯಿಂದ ಕಳುಹಿಸಲಾಗಿದೆ ಎಂಬ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಪರಿಶೀಲನೆಗೆ ತೆರಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





