ಕಾರವಾರ: ನೆರೆಯಿಂದ ಸೇತುವೆ ಕೊಚ್ಚಿಹೋಗಿ ಮೂರು ವರ್ಷಗಳೇ ಕಳೆದಿವೆ. ಸ್ಥಳಕ್ಕೆ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು ಭೇಟಿ ನೀಡಿ ತೆರಳಿದ್ದರೂ ಇದುವರೆಗೂ ಸೇತುವೆ ಮರು ನಿರ್ಮಾಣ ಮಾತ್ರ ಸಾಧ್ಯವಾಗಿಲ್ಲ. ಪರಿಣಾಮ ಗ್ರಾಮಸ್ಥರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಸೇತುವೆಯಲ್ಲೇ ಜೀವ ಕೈಯಲ್ಲಿ ಹಿಡಿದು ನಿತ್ಯ ಓಡಾಟ ನಡೆಸುವಂತಾಗಿದೆ.
ನೂತನ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾದ ದುಃಸ್ಥಿತಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಗ್ಗಾರು, ಕಲ್ಲೇಶ್ವರ ಹಾಗೂ ಹಳವಳ್ಳಿ ಗ್ರಾಮಸ್ಥರದ್ದಾಗಿದೆ. ಯಲ್ಲಾಪುರ ತಾಲೂಕಿನ ಗುಳ್ಳಾಪುರದಿಂದ ಹೆಗ್ಗಾರು ಗ್ರಾಮಕ್ಕೆ ಸಂಪರ್ಕಿಸಲು ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕಳೆದ 2020ರಲ್ಲಿ ಸಂಭವಿಸಿದ್ದ ನೆರೆಯಲ್ಲಿ ಕೊಚ್ಚಿಹೋಗಿತ್ತು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಶೀಘ್ರ ಸೇತುವೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಆದರೆ, ಮೂರು ವರ್ಷ ಕಳೆದರೂ ಕೂಡ ಸೇತುವೆ ನಿರ್ಮಾಣವಾಗಿಲ್ಲ. ಸದ್ಯ ತಾತ್ಕಾಲಿಕ ಸೇತುವೆಯಲ್ಲಿ ಜನರು ಓಡಾಟ ನಡೆಸುತ್ತಿದ್ದಾರೆ. ಅದೂ ಸಹ ಮಳೆ ಹೆಚ್ಚಾದ ಸಂದರ್ಭದಲ್ಲಿ ನೀರಲ್ಲಿ ಮುಳುಗುವುದರಿಂದ ಓಡಾಟಕ್ಕೆ ಅಪಾಯಕಾರಿಯಾಗಿದೆ. ಆದಷ್ಟು ಶೀಘ್ರದಲ್ಲಿ ಶಾಶ್ವತ ಸೇತುವೆ ನಿರ್ಮಿಸಿಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





