ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸಭೆರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪ್ಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿ ಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೇ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ. ಕಾವಾಡಿಗರ ಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ- ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





