ಸುಳ್ಯ (ದಕ್ಷಿಣ ಕನ್ನಡ) : ಕೋಝಿಕ್ಕೋಡ್ನಲ್ಲಿ ಇಬ್ಬರು ಶಂಕಿತ ನಿಫಾ ವೈರಸ್ನಿಂದ ಮೃತಪಟ್ಟಿದ್ದಾರೆ ಎಂದು ಕೇರಳದ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈಗಾಗಲೇ ನಿಫಾ ವೈರಸ್ ಪತ್ತೆಯಾಗಿ ಇಬ್ಬರು ಮೃತಪಟ್ಟ ಕೇರಳದ ಕೊಝಿಕ್ಕೋಡ್ ಜಿಲ್ಲೆಯ ಮರುದ್ವಾಂಕರ, ಆಯಂಚೇರಿ, ಕಾವಿಲಂಪ್ಪಾರ, ವಿಲ್ಯಾಂಪಳ್ಳಿ, ಕುಟ್ಯಾಡಿ, ಮಂಗಲಾಡ್ ಸೇರಿದಂತೆ ಹಲವಾರು ಪ್ರದೇಶಗಳನ್ನು ಕಂಟೋನ್ಮೆಂಟ್ ಪ್ರದೇಶಗಳಾಗಿ ಘೋಷಣೆ ಮಾಡಲಾಗಿದೆ. ಮಲಪ್ಪುರಂ, ಕಣ್ಣೂರು, ವಯನಾಡ್, ಕಾಸರಗೋಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ನಿರ್ದೇಶನವನ್ನು ಕೇರಳದ ಆರೋಗ್ಯ ಇಲಾಖೆ ನೀಡಿದೆ.
ಮಾತ್ರವಲ್ಲದೇ, ಕಾಸರಗೋಡಿನ ಬಹುತೇಕ ಪ್ರದೇಶಗಳು ಸುಳ್ಯ, ಜಾಲ್ಸೂರು, ಮಡಿಕೇರಿ ಮಂಜೇಶ್ವರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಕ್ಕೆ ಹೊಂದಿಕೊಂಡಿವೆ. ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಪ್ರದೇಶದ ಜನರು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಆರೋಗ್ಯ ಸಮಸ್ಯೆ ಸೇರಿದಂತೆ ಇತರೆ ಅಗತ್ಯತೆಗಳಿಗಾಗಿ ಸುಳ್ಯ, ಮಡಿಕೇರಿ, ಮೈಸೂರು, ಮಂಗಳೂರು ಭಾಗಕ್ಕೆ ಹೆಚ್ಚಾಗಿ ಆಗಮಿಸುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹೆಚ್ಚಾಗಿ ಹರಡುತ್ತಿದೆ ಎನ್ನಲಾಗುತ್ತಿರುವುದರಿಂದ ಗಡಿ ಪ್ರದೇಶದಲ್ಲಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಬಾವಲಿಗಳು ಕಚ್ಚಿದ ಹಣ್ಣುಹಂಪಲುಗಳನ್ನು ಯಾವುದೇ ಕಾರಣಕ್ಕೂ ತಿನ್ನಬಾರದು ಎಂದು ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





