ಚಾಮರಾಜನಗರ: ಸಮರ್ಪಕ ರಸ್ತೆಗೆ ಆಗ್ರಹಿಸಿ ತಮಿಳುನಾಡಿನ ಜನರು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 5 ತಾಸಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಗಾದರೆ ಈ ಘಟನೆ ಬಳಿಕ ಮತ್ತೇನು ಅವಾಂತರಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ತಮಿಳುನಾಡು ಮತ್ತು ಕರ್ನಾಟಕದ ಗಡಿಯಾದ ಅಸನೂರಿನಲ್ಲಿ ತಮಿಳುನಾಡಿನ 15 ಗ್ರಾಮಗಳ ಜನರು, ಶಾಲಾ ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವೊಂದು ವಾಹನವು ಸಂಚಾರ ಮಾಡಲಾಗದೇ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿದೆ.
ದಿಂಬಂ ಘಟ್ಟ ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ, ಅರಣ್ಯ ಇಲಾಖೆ ಡಾಂಬಾರು ರಸ್ತೆ ಮಾಡಲು ಅವಕಾಶ ಮಾಡಿಕೊಡದ ಹಿನ್ನೆಲೆ ರೊಚ್ಚಿಗೆದ್ದ ಜನರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯು ಜನರಿಗೆ ತೊಂದರೆ ಕೊಡುತ್ತಿದ್ದು, ಮಾನವ-ಪ್ರಾಣಿ ಸಂಘರ್ಷಕ್ಕೆ ಯಾವುದೇ ಪರಿಹಾರ ನೀಡುತ್ತಿಲ್ಲ. ರಸ್ತೆ ಸಮಸ್ಯೆಯಿಂದ 20ಕ್ಕೂ ಗ್ರಾಮಗಳು ತತ್ತರಿಸುತ್ತಿದ್ದು, ರಸ್ತೆ ಸರಿಪಡಿಸಲು ಅವಕಾಶ ಮಾಡಿಕೊಡುವ ತನಕ ಪ್ರತಿಭಟನೆ ಕೈ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





