ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ.
ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.
ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎಂದು ಸಂಶಯ ವ್ಯಕ್ತವಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.
ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಚಿರತೆ, ಹುಲಿ ದಾಳಿಯಿಂದ ಅನೇಕರು ಗಾಯಗೊಂಡಿದ್ದರೆ, ಕೆಲವರ ಪ್ರಾಣ ಪಕ್ಷಿ ಹಾರಿಹೋಗಿದೆ. ಇನ್ನು ಕೆಲವರು ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

